ಬೆಂಗಳೂರು: ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ಜಾರಿ ಖಂಡಿಸಿ ಭಾರತೀಯ ವೈದ್ಯರ ಸಂಘ (ಐಎಂಎ) ಶನಿವಾರ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ.
ಇವೆಲ್ಲದರ ನಡುವೆ ಖಾಸಗಿ ಆಸ್ಪತ್ರೆ ಗೆ ಆಗಮಿಸಿದ ರೋಗಿಗಳು ತಮಗೆ ಬೇಕಾದ ಚಿಕಿತ್ಸೆ ಸಿಗದೇ ಆಸ್ಪತ್ರೆಗಳ ಬಳಿ ಪರದಾಡುತ್ತಿರುವ ಸನ್ನಿವೇಶ ಬಹುತೇಕ ಆಸ್ಪತ್ರೆಗಳ ಮುಂಭಾಗದಲ್ಲಿ ಕಂಡು ಬರುತ್ತಿದೆ.
ಖಾಸಗಿ ಆಸ್ಪತ್ರೆಗಳ ಬಂದ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ತುರ್ತು ಚಿಕಿತ್ಸೆ ರೋಗಿಗಳನ್ನು ಹೊರತು ಪಡಿಸಿ ಇತರ ಖಾಯಿಲೆ ಚಿಕಿತ್ಸೆಗಾಗಿ ಬಂದವರಿಗೆ ಆಸ್ಪತ್ರೆ ಸಿಬ್ಬಂದಿ ಪರ್ಯಾಯವಾಗಿ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡುವಂತೆ ಸಲಹೆ ನೀಡುತ್ತಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಸರಕಾರ ಪರ್ಯಾಯ ಕ್ರಮ ತೆಗೆದುಕೊಂಡಿದೆ. ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿಯೂ ಬೆಳಗಿನಿಂದ ಸಂಜೆ ವರೆಗೆ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ರಜೆಯಲ್ಲಿರುವ ವೈದ್ಯರು ಹಾಗೂ ನರ್ಸಿಂಗ್ ಸಿಬ್ಬಂದಿ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಅಲ್ಲದೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಚಿಕಿತ್ಸೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಶುಕ್ರವಾರ ಸುತ್ತೋಲೆ ಹೊರಡಿಸಿದ್ದಾರೆ.
ಇದರ ನಡುವೆಯೇ ನಿನ್ನೆಯಷ್ಟೆ ಗೋಕಾಕ ನಗರದ ನಿವಾಸಿಗಳಾದ ಬಸಪ್ಪ ದಂಪತಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಜನನವಾಗಿದ್ದ ಮಗುವಿಗೆ ಶ್ವಾಸಕೋಶದ ಸಮಸ್ಯೆ ಉಂಟಾಗಿದೆ. ಈ ನಡುವೆ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದರೆ ಮಗುವಿಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದೇ ಮಗು ಸಾವನ್ನಪ್ಪಿದೆ ಅಂತ ತಿಳಿದು ಬಂದಿದೆ.